ಉ.ಕ ಸುದ್ದಿಜಾಲ ಅಥಣಿ :

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕಟಗೇರಿ ಗ್ರಾಮದ ಹೊರವಲಯದಲ್ಲಿ ಪತ್ನಿಯ ಮೇಲಿನ ಸಂಶಯ ಹಾಗೂ ಕುಡಿತದ ಚಟದ ಹಿನ್ನೆಲೆ ಪತಿಯೊಬ್ಬ ಮಲಗಿದ್ದ ಪತ್ನಿಯನ್ನು ಮಾರಕಾಸ್ತ್ರದಿಂದ ಕಡಿದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ.

ಶೋಭಾ ಪರಗೂಂಡ ಸಾರವಾಡ (35) ಕೊಲೆಯಾದ ಮಹಿಳೆ. ಆರೋಪಿ ಪತಿ ಪರಗೂಂಡ ಸಾರವಾಡನನ್ನು ಪೊಲೀಸರು ಬಂಧಿಸಿದ್ದಾರೆ. ಮೂಲತಃ ಖವಟಗೋಪ್ಪ ಗ್ರಾಮದವರಾದ ದಂಪತಿ ಪ್ರಸ್ತುತ ಕಟಗೇರಿಯಲ್ಲಿ ವಾಸವಾಗಿದ್ದರು.

ವಿವಾಹವಾಗಿ 15 ವರ್ಷಗಳಾದರೂ ಪತ್ನಿಯ ಮೇಲೆ ಸಂಶಯ ಪಡುತ್ತಿದ್ದ ಪರಗೂಂಡ, ಇದೇ ವಿಚಾರವಾಗಿ ಆಗಾಗ ಜಗಳ ಮಾಡುತ್ತಿದ್ದ ಎನ್ನಲಾಗಿದೆ. ಘಟನೆಯ ದಿನ ರಾತ್ರಿ ಶೋಭಾ ಗಾಢ ನಿದ್ರೆಯಲ್ಲಿದ್ದ ವೇಳೆ ಮಾರಕಾಸ್ತ್ರದಿಂದ ದಾಳಿ ನಡೆಸಿದ್ದು,

ತೀವ್ರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶೋಭಾ ಕಟಗೇರಿಯ ಔಜಿಕರ ಮಠದ ಶಾಲೆಯಲ್ಲಿ ಅಡುಗೆ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದು, ಇಬ್ಬರು ಮಕ್ಕಳನ್ನು ಸಾಕುತ್ತಿದ್ದರು.

ಘಟನೆಯಿಂದ ಗ್ರಾಮದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ತಾಯಿಯನ್ನು ಕಳೆದುಕೊಂಡ ಇಬ್ಬರು ಮಕ್ಕಳು ಹಾಗೂ ತಂದೆ ಬಂಧನಕ್ಕೊಳಗಾಗಿರುವ ಕಾರಣ ಅವರ ಭವಿಷ್ಯದ ಬಗ್ಗೆ ಆತಂಕ ವ್ಯಕ್ತವಾಗಿದೆ.

ಮಾಹಿತಿ ತಿಳಿಯುತ್ತಿದ್ದಂತೆ ಅಥಣಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಆರೋಪಿಯನ್ನು ಬಂಧಿಸಿದ್ದಾರೆ. ಈ ಸಂಬಂಧ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.